ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ‘ಗೃಹಲಕ್ಷ್ಮಿ ಯೋಜನೆ’ಗೆ ಸರ್ವ ಸಿದ್ಧತೆ ಮಾಡಿಕೊಂಡಿದೆ. ಅದರ ಸಲುವಾಗಿ ಈಗ ‘ಗೃಹಲಕ್ಷ್ಮಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಮನೆಯ ಹಿರಿಯ ಮಹಿಳೆಗೆ ಪ್ರತಿ ತಿಂಗಳು ರೂ.2000 ನೀಡುವಂತ ‘ಗೃಹಲಕ್ಷ್ಮಿ ಯೋಜನೆ’ ಘೋಷಿಸಿತ್ತು. ಈಗ ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಮಂಗಳವಾರದಿಂದ ಚಾಲನೆ ಸಿಗಲಿದೆ ಎಂದು ತಿಳಿಸಿದ್ದಾರೆ.
ತಾಂತ್ರಿಕ ಮತ್ತು ಕೆಲವು ಆಡಳಿತಾತ್ಮಕ ಕಾರಣದಿಂದ ತಡವಾಗಿತ್ತು. ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭಗೊಂಡಿರಲಿಲ್ಲ. ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಕೆಗೆ ಎಲ್ಲಾ ಸಿದ್ಧತೆ ಪೂರ್ಣಗೊಂಡ ನಂತರ ಈಗ ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗಾಗಿ ಸೇವಾ ಸಿಂಧುವಿನ ಪ್ರತ್ಯೇಕ ವೆಬ್ ಸೈಟ್,ಗ್ರಾಮ ಒನ್, ಕರ್ನಾಟಕ ಓನ್, ಬೆಂಗಳೂರು ಒನ್ ಸೆಂಟರ್, ನಾಡ ಕಛೇರಿ, ತಾಲ್ಲೂಕು ದಂಡಾಧಿಕಾರಿಗಳ ಕಛೇರಿಗಳಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ.ಕುಟುಂಬದ ಯಜಮಾನಿಗೆ 2,000 ರೂಪಾಯಿಯ ಮಾಸಿಕ ಭತ್ಯೆ ನೀಡುವ ಬಗೆಗಿನ ಪ್ರಸ್ತಾಪದಲ್ಲಿ ಒಂದಷ್ಟು ನಿಯಮಗಳನ್ನು ಹೊರಡಿಸಲಾಗಿದೆ. ಅದರಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆ ಈ ಯೋಜನೆಯ ಅರ್ಹ ಫಲಾನುಭವಿ ಆಗಿರುತ್ತಾರೆ.
ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಅಥವಾ ತಾವೇ ಖುದ್ದು ಅಧಿಕಾರಿಗಳ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.ಯೋಜನೆಯ ಸೌಲಭ್ಯ ಪಡೆಯುವ ಅರ್ಜಿದಾರರ ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕಿದೆ.ಅರ್ಜಿಯಲ್ಲಿನ ಅಂಶಗಳು ತಪ್ಪೆಂದು ಕಂಡುಬಂದಲ್ಲಿ ಅರ್ಜಿದಾರರು ಅಲ್ಲಿಯವರೆಗೆ ತಗೆದುಕೊಂಡ ಹಣವನ್ನು ವಸೂಲಿ ಮಾಡಿ, ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು.ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿಯನ್ನು ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಸೈಬರ್ ಕೆಫೆಗಳ ಮೂಲಕ ಸಲ್ಲಿಸಬಹುದು.
ಭೌತಿಕವಾಗಿ ಅರ್ಜಿ ಸಲ್ಲಿಸುವವರು ತಮ್ಮ ಸಮೀಪದ ನಾಡ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದು.
ಗೃಹಲಕ್ಷ್ಮಿ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಈ ಯೋಜನೆಯ ಅಧಿಕಾರಿಗಳು ಎಂದು ಮಂಜೂರಾತಿ ಪ್ರಾಧಿಕಾರದ ಅಧಿಕಾರಿಗಳೆಂದು ಪರಿಗಣಿಸಲಾಗಿದೆ.
ಈ ಯೋಜನೆಯ ವಿವರವಾದ ರೂಪುರೇಷ ಹಾಗೂ ಮಾರ್ಗಸೂಚಿಗಳು
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ.
ಈ ಯೋಜನೆಯ ಫಲಾನುಭವಿಗಳು 2023ರ ಜೂನ್ 15 ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಬೇಕು. ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.
ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲೀ ಅಥವಾ ಭೌತಿಕವಾಗಿಯಾಗಲೀ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಲಾಗುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ.
ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್ ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ .