ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮ ನೌಕರರು ಅಕ್ಟೋಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಕೆ.ಎಸ್.ಆರ್.ಟಿ.ಸಿ ನಿಗಮಗಳ ಒಕ್ಕೂಟದ (CITU) ಅಧ್ಯಕ್ಷ ಎಚ್.ಡಿ. ರೇವಪ್ಪ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. 2020 ಜನವರಿ 1 ರ ನಂತರ ವೇತನವನ್ನು ಶೇಕಡಾ 5 ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ಹಿಂಬಾಕಿಯನ್ನು ಪಾವತಿಸಬೇಕು. ಎಲೆಕ್ಟ್ರಿಕ್ ಬಸ್ ಗಳಿಗೆ ನಮ್ಮ ನೌಕರರೇ ಚಾಲಕರಾಗಬೇಕು. ಈ ಹಿಂದೆ ಪ್ರತಿಭಟನೆ ನಡೆಸಿದಾಗ ವಜಾಗೊಳಿಸಿದ ಎಲ್ಲಾ ನೌಕರರನ್ನು ವಾಪಾಸ್ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನಾಲ್ಕು ನಿಗಮಗಳ ನೌಕರರು ಅಕ್ಟೋಬರ್ 5 ರಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅಕ್ಟೋಬರ್ 5 ರಂದು ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.