ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳಲ್ಲಿ ಶೇಕಡ 40ರಷ್ಟು ಕಮಿಷನ್ ಪಡೆಯಲಾಗುತ್ತಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಗುತ್ತಿಗೆದಾರರ ಸಂಘವು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಆಯೋಗಕ್ಕೆ ಮಂಗಳವಾರ ದೂರು ದಾಖಲಿಸಿದೆ.
ಇತರ ಪದಾಧಿಕಾರಿಗಳೊಂದಿಗೆ ನಿಯೋಗದಲ್ಲಿ ತೆರಳಿ ನಾಗಮೋಹನ್ ದಾಸ್ ಅವರನ್ನು ಭೇಟಿ ಮಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ, ದೂರು ಮತ್ತು 600ಕ್ಕೂ ಹೆಚ್ಚು ಪುಟಗಳಷ್ಟು ದಾಖಲೆಗಳನ್ನು ಸಲ್ಲಿಸಿದರು.
‘ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ಕಾಮಗಾರಿಗಳಲ್ಲಿ ಶೇ 40ರಷ್ಟು ಕಮಿಷನ್ ಪಡೆಯಲಾಗುತ್ತಿದೆ’ ಎಂದು ಕೆಂಪಣ್ಣ ಅವರು ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲರು ಹಾಗೂ ಅಂದಿನ ಮುಖ್ಯಮಂತ್ರಿಯವರಿಗೆ ದೂರು ಸಲ್ಲಿಸಿದ್ದರು. ಅವರ ದೂರೂ ಸೇರಿದಂತೆ ಹಲವು ಅಂಶಗಳ ಕುರಿತು ತನಿಖೆಗಾಗಿ ಆಯೋಗವನ್ನು ನೇಮಿಸಲಾಗಿದೆ.