ರಾಜ್ಯ ಸರ್ಕಾರದ ಕಾರ್ಯಕ್ರಮಗಳು, ಅಭಿವೃದ್ಧಿ ಕಾರ್ಯಗಳ ತ್ವರಿತ ಪ್ರಗತಿಗಾಗಿ 30 ಜಿಲ್ಲೆಗಳ ತಾಲೂಕುಗಳಿಗೆ ತಾಲೂಕು ಉಸ್ತುವಾರಿಯನ್ನು ನೇಮಕ ಮಾಡಿ ಆದೇಶಿಸಿದೆ.ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
ಅದರಲ್ಲಿ ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಭೌತಿಕ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ.
ಕರ್ನಾಟಕ ಆಡಳಿತ ಸೇವೆಯ ( KAS) ಅಧಿಕಾರಿಗಳನ್ನು ತಾಲೂಕು ಉಸ್ತುವಾರಿ ಅಧಿಕಾರಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಿದೆ. ಅಲ್ಲದೇ ಅವರು ನಿರ್ವಹಿಸಬೇಕಾದ ಕಾರ್ಯಗಳು ಏನು ಅಂತ ಸೂಚಿಸಿದೆ.
ತಾಲೂಕು ಉಸ್ತುವಾರಿ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳು 1. ಸರ್ಕಾರವು ನೂತನವಾಗಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ (ಗೃಹಲಕ್ಷ್ಮಿ ಗ್ರಹಜ್ಯೋತಿ, ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ) ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿ, ನ್ಯೂನತೆಗಳನ್ನು ಸರಿಪಡಿಸಲು ಕ್ರಮವಹಿಸುವುದು.
ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶಾಲೆ, ಕಾಲೇಜು ಹಾಗೂ ಐಟಿಐ ಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅಧ್ಯಯಿಸಿ, ಸೂಕ್ತ ಪರಿಹಾರ ಕಂಡುಕೊಳ್ಳುವುದು ಹಾಗೂ ಶಾಲಾ ಕಟ್ಟಡ ದುರಸ್ತಿ, ಹೊಸ ಕಟ್ಟಡಗಳ ನಿರ್ಮಾಣ ಇತ್ಯಾದಿ ಕಾಮಗಾರಿಗಳ ಪರಿಶೀಲನೆ ನಡೆಸುವುದು. ಸ್ವಂತ ಕಟ್ಟಡ ಇಲ್ಲದಿರುವ ಅಂಗನವಾಡಿಗಳಿಗೆ ನಿವೇಶನವನ್ನು ಒದಗಿಸುವ ಬಗ್ಗೆ ಪರಿಶೀಲನ ಹಾಗೂ ನಿರ್ಮಾಣ ಹಂತದಲ್ಲಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪರಿಶೀಲಿಸುವುದು ಹಾಗೂ ತಾಲ್ಲೂಕಿನಲ್ಲಿರುವ ಅಪೌಷ್ಟಿಕ ಮಕ್ಕಳ ವಿವರ ಪಡೆದು ನಿರಂತರವಾಗಿ ಸರ್ಕಾರದ ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಕ್ರಮವಹಿಸುವುದು.
ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಇಂಧನ, ಜಲಸಂಪನ್ಮೂಲ, ಲೋಕೋಪಯೋಗಿ, ಕೃಷಿ, ತೋಟಗಾರಿಕೆ ಇಲಾಖೆಗಳಲ್ಲಿನ ಪ್ರಮುಖ ಕಾರ್ಯಕ್ರಮಗಳಾದ ಕುಡಿಯುವ ನೀರು, ರಸ್ತೆಗಳು, ವಿದ್ಯುಚ್ಛಕ್ತಿ, ಮೇವು ಲಭ್ಯತೆ, ಬೀಜ ಮತ್ತು ರಸಗೊಬ್ಬರ, ಮಧ್ಯಾಹ್ನದ ಬಿಸಿಯೂಟ, ನರೇಗಾ, ಸಾಮಾಜಿಕ ಭದ್ರತೆಯಡಿ ನೀಡುತ್ತಿರುವ ಪಿಂಚಣಿ ಕಾರ್ಯಕ್ರಮಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸುವುದು. ತಾಲ್ಲೂಕಿನ ಯುವಕರಿಗೆ ಉದ್ಯೋಗಾಧಾರಿತ ತರಬೇತಿ ಕುರಿತು ಸಮನ್ವಯ ಹಾಗೂ ಸಾಲ ಮಂಜೂರಾತಿಗೆ ಬೇಕಾದ ಅವಶ್ಯ ಸಲಹೆ ನೀಡಲು ಕ್ರಮವಹಿಸುವುದು ಹಾಗೂ ತಾಲ್ಲೂಕಿನ ಯುವಕ-ಯುವತಿಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಅವರ ವೃತ್ತಿನೈಪುಣ್ಯತೆ (skill) ಹೆಚ್ಚಿಸಿ ಅವರ ಜೀವನೋಪಾಯವನ್ನು ಸಧೃಡಗೊಳಿಸಲು ಕ್ರಮವಹಿಸುವುದು. ತಾಲ್ಲೂಕಿನಲ್ಲಿ ಗ್ರಹ ಮತ್ತು ಸಣ್ಣ ಕೈಗಾರಿಕೆಗಳನ್ನು ಗುರುತಿಸಿ, ಅವರಿಗೆ ಸರ್ಕಾರದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಉದ್ಯೋಗಾವಕಾಶ ಕಲ್ಪಿಸುವ ಬಗ್ಗೆ ಕ್ರಮವಹಿಸುವುದು.
ತಾಲ್ಲೂಕು ಉಸ್ತುವಾರಿ ಅಧಿಕಾರಿಗಳು ಮೇಲ್ಕಂಡ ಕಾರ್ಯಗಳನ್ನು ಅತ್ಯಂತ ಬದ್ಧತೆಯಿಂದ ನಿರ್ವಹಿಸಲು ಸೂಚಿಸಿದೆ ಹಾಗೂ ಪ್ರತಿಮಾಹೆ ತಾವು ನಿರ್ವಹಿಸಿದ ಕಾರ್ಯವರದಿಯನ್ನು ಸರ್ಕಾರಕ್ಕೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಿಗೆ ಹಾಗೂ ಜಿಲ್ಲಾಧಿಕಾರಿಯವರಿಗೆ ಸಲ್ಲಿಸುವುದು. ತಾಲ್ಲೂಕು ಉಸ್ತುವಾರಿ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವುದು ಮತ್ತು ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಹಿಸುವ ಹೆಚ್ಚುವರಿ ಕಾರ್ಯಗಳನ್ನು ನಿರ್ವಹಿಸುವುದು.