ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಾಲಯವು ನಿಗದಿಪಡಿಸಿದ ಮೂಲ ಗಡುವಿನ ಪ್ರಕಾರ ಜನವರಿ 21 ರೊಳಗೆ ಎಲ್ಲಾ 11 ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿದ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ಆರೋಪದಲ್ಲಿ ಹನ್ನೊಂದು ಅಪರಾಧಿಗಳು ಶಿಕ್ಷೆಗೆ ಗುರಿಯಾಗಿದ್ದರು. ಆದರೆ ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ, ಆಗಸ್ಟ್ 14, 2023ರಂದು, ಈ ಅಪರಾಧಿಗಳನ್ನು ಗುಜರಾತ್ ಸರ್ಕಾರ ಅವಧಿಪೂರ್ವವಾಗಿ ಬಿಡುಗಡೆ ಮಾಡಿತ್ತು. ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠ ಜನವರಿ 8ರಂದು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ರದ್ದುಗೊಳಿಸಿತ್ತು. ಪ್ರಕರಣದ ಅಪರಾಧಿಗಳಿಗೆ ಕ್ಷಮಾದಾನ ನೀಡಲು ಗುಜರಾತ್ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ, ಪ್ರಕರಣದ ಎಲ್ಲಾ ಹನ್ನೊಂದು ಅಪರಾಧಿಗಳಿಗೆ ಎರಡು ವಾರಗಳಲ್ಲಿ ಶರಣಾಗುವಂತೆ ನಿರ್ದೇಶಿಸಿತ್ತು.