ಸಿಸಿ, ಒಸಿ ಇಲ್ಲದ ಕಟ್ಟಡ ಮಾಲಕರು ಕತ್ತಲಲ್ಲಿ.! ಸುಪ್ರೀಂಕೋರ್ಟ್‌ನ ಆದೇಶವು ಸರ್ಕಾರದ ಕೈಕಟ್ಟಿ ಹಾಕಿದೆ

ರಾಜ್ಯ

ಸ್ವಾಧೀನಾನುಭವ ಪತ್ರ ಮತ್ತು ಕಟ್ಟಡ ಪ್ರಾರಂಭಿಕ ಪ್ರಮಾಣಪತ್ರ ಇಲ್ಲದೆ 1,200 ಚದರ ಅಡಿ ಮತ್ತು ಅದಕ್ಕಿಂತ ಮೇಲ್ಪಟ್ಟು ನಿರ್ಮಿಸಿರುವ 4.30 ಲಕ್ಷಕ್ಕೂ ಹೆಚ್ಚಿನ ಮನೆ ಮಾಲೀಕರು ವಿದ್ಯುತ್ ಸೌಲಭ್ಯ ಸಿಗದೆ ಕತ್ತಲಲ್ಲೇ ಬದುಕು ಸವೆಸುವ ಸ್ಥಿತಿ ನಿರ್ಮಾಣಗೊಂಡಿದೆ. ಅಲ್ಲದೆ, ನೀರಿನ ಸೌಲಭ್ಯವೂ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ತಲೆದೋರಿದೆ. ಈ ನಡುವೆ, ಸರ್ಕಾರವು ಕಾನೂನು ಕಟ್ಟಳೆ ಮೀರದೆ ಸಿಸಿ, ಒಸಿ ಇಲ್ಲದ ಮನೆಗಳಿಗೆ ಯಾವ ರೀತಿಯಲ್ಲಿ ಮೂಲಸೌಲಭ್ಯ ಕಲ್ಪಿಸಬೇಕೆಂಬ ಇಕ್ಕಟ್ಟಿಗೆ ಸಿಲುಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಧಿಕಾರಿಗಳ ಜೊತೆ ಗ್ರೇಟರ್ ಬೆಂಗಳೂರು ಹಾಗೂ ರಾಜ್ಯದ ಜಿಲ್ಲೆಗಳಲ್ಲಿ ಸಿಸಿ ಮತ್ತು ಒಸಿ ಇಲ್ಲದೆ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಉಂಟಾಗಿರುವ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದರು. ಇದೇ 8ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ, ಸಿಸಿ, ಒಸಿ ಇಲ್ಲದೆ ಮನೆ ನಿರ್ಮಿಸಿರುವವರಿಗೆ ಮೂಲಸೌಕರ್ಯ ಕಲ್ಪಿಸುವುದು ಸರ್ಕಾರಕ್ಕೆ ತಲೆನೋವಾಗಿದೆ.

ರಾಜ್ಯದಲ್ಲಿ 1,200 ಚದರ ಅಡಿ ಮತ್ತು ಅದಕ್ಕಿಂತ ಮೇಲ್ಪಟ್ಟು, ಸಿಸಿ-ಒಸಿ ಇಲ್ಲದೆ ನಿರ್ಮಿಸಿರುವ 4.30 ಲಕ್ಷಕ್ಕೂ ಹೆಚ್ಚು ಕಟ್ಟಡಗಳನ್ನು ಒಡೆಯುವುದು ಸರಿಯಲ್ಲ ಎಂಬುದು ಸರ್ಕಾರದ ಅಭಿಪ್ರಾಯವಾಗಿದೆ. ಹೀಗಾಗಿ, ಒಂದು ಬಾರಿ ಸಿಸಿ, ಒಸಿ ಇಲ್ಲದ ಕಟ್ಟಡಗಳಿಗೆ ಮೂಲಸೌಕರ್ಯ ಕಲ್ಪಿಸುವ ಉದ್ದೇಶ ಹೊಂದಿದೆ. ಆದರೆ, ಸುಪ್ರೀಂಕೋರ್ಟ್‌ನ ಆದೇಶವು ಸರ್ಕಾರದ ಕೈಕಟ್ಟಿ ಹಾಕಿದೆ. ಈ ಹಿನ್ನೆಲೆಯಲ್ಲಿ, ಕಾನೂನಿನ ವ್ಯಾಪ್ತಿಯಲ್ಲಿಯೇ ಒಂದು ಬಾರಿಗೆ ಅವಕಾಶ ಕಲ್ಪಿಸಲು ಸಾಧ್ಯವೇ ಎಂಬುದರ ಕುರಿತು ಗಂಭೀರ ಚರ್ಚೆ ನಡೆಸುತ್ತಿದೆ. ಸುಪ್ರೀಂಕೋರ್ಟ್ ಆದೇಶ ಇರುವ ಕಾರಣ, ಕಾನೂನು ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಲು ಕಾನೂನು ತಜ್ಞರ ಸಲಹೆ ಸೇರಿದಂತೆ ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳ ಅಭಿಪ್ರಾಯವನ್ನು ಕ್ರೋಢೀಕರಿಸಲಾಗುತ್ತಿದೆ.

ವಿದ್ಯುತ್ ಸರಬರಾಜು ಕಂಪನಿಗಳು ಕಟ್ಟಡ ಮುಕ್ತಾಯ ಪ್ರಮಾಣಪತ್ರ (ಸಿಸಿ) ಮತ್ತು ವಾಸಯೋಗ್ಯ ಪ್ರಮಾಣಪತ್ರ (ಓಸಿ) ಹಾಜರುಪಡಿಸಿದ ನಂತರವೇ ಆ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡುತ್ತವೆ.

ಇದು ರಾಜ್ಯದಲ್ಲಿನ ಸಮಸ್ಯೆಯಲ್ಲ. ಇಡೀ ದೇಶದಲ್ಲಿಯೂ ಈ ಸಮಸ್ಯೆ ಇದ್ದು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಮಾಡಿದೆ. “ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿಸಿ, ವಾಸ ಯೋಗ್ಯ ಪ್ರಮಾಣ ಪತ್ರ ಪಡೆಯಬೇಕು. ಒಸಿ ಇಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕ ನೀಡಬಾರದು” ಎಂದು ಸೂಚನೆ ನೀಡಿದೆ. ಉತ್ತರ ಪ್ರದೇಶದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಸುಪ್ರೀಂಕೋರ್ಟ್ 2024ರ ಡಿಸೆಂಬರ್‌ನಲ್ಲಿ “ಒಸಿ, ಸಿಸಿ ಇಲ್ಲದೆ ಮೂಲಸೌಕರ್ಯ ಕಲ್ಪಿಸಬಾರದು” ಎಂದು ಹೇಳಿದೆ. “ನಕ್ಷೆ ಉಲ್ಲಂಘನೆ ಮಾಡಿ ಉಡಾಫೆಯಿಂದ ಕಟ್ಟಡಗಳನ್ನು ನಿರ್ಮಿಸುವಂತಹ ಪ್ರವೃತ್ತಿಗೆ ಉತ್ತೇಜನ ನೀಡಬಾರದು. ಪ್ರತಿಯೊಬ್ಬರೂ ನೀತಿ-ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸಿದರೆ, ಅಂತಹ ಸಂಗತಿಗಳನ್ನು ನ್ಯಾಯಾಲಯಗಳ ಗಮನಕ್ಕೆ ತರಬೇಕು. ಅಂತಹ ಪ್ರಕರಣಗಳಲ್ಲಿ ಕಠಿಣ ಕೈಗಳಿಂದ ದಂಡಿಸಬೇಕು, ಕರುಣೆ ತೋರಬಾರದು” ಎಂದು ನ್ಯಾಯಾಲಯ ಹೇಳಿದೆ.