ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್ಗಳನ್ನು ವಂಚನೆಯ ಮೂಲಕ ಕೈವಶ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಮೂಡಬಿದ್ರಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ಸಿ ನ್ಯಾಯಾಲಯವು ಕೆನರಾ ಲೈಟಿಂಗ್ ಇಂಡಸ್ಟ್ರಿಯಲ್ ಖಾಸಾಗಿ ಲಿಮಿಟೆಡ್ ಕಂಪೆನಿಯ ಹಾಗೂ ಅದರ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಮ್ಮತಿ ನೀಡಿದೆ.
RTI Activists for Justice ಸಂಸ್ಥೆ ಸಲ್ಲಿಸಿದ ಖಾಸಗಿ ದೂರನ್ನು ಪರಿಶೀಲಿಸಿದ ನ್ಯಾಯಾಲಯ, ಸಾರ್ವಜನಿಕ ಟೆಂಡರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ವಂಚನೆ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಪ್ರಾಥಮಿಕ ಹಂತದಲ್ಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಕಷ್ಟು ದಾಖಲೆಗಳು ಇವೆ ಎಂದು ಅಭಿಪ್ರಾಯಪಟ್ಟಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ವಿರುದ್ಧ ಯಾವುದೇ ಪ್ರಾಥಮಿಕ ಸಾಕ್ಷ್ಯ ಲಭ್ಯವಿಲ್ಲ ಎಂಬ ಕಾರಣದಿಂದ, ಅವರ ವಿರುದ್ಧದ ದೂರನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಮ್ಮನ್ಸ್ ಜಾರಿ ಮಾಡಲು ನ್ಯಾಯಾಲಯ ಆದೇಶಿಸಿದ್ದು, ಪ್ರಕರಣದ ತಾತ್ವಿಕ ವಿಚಾರಣೆ ಮುಂದಿನ ಹಂತದಲ್ಲಿ ನಡೆಯಲಿದೆ ಎಂದು ತಿಳಿಸಿದೆ. ದೂರುದಾರರ ಪರವಾಗಿ ಎನ್.ಕೆ. ಅಸೋಸಿಯೇಟ್ಸ್ ಇದರ ವಕೀಲರಾದ ನವೀನ್ ಜಿ. ಹಾಗೂ ಕುಮಾರ ಸತ್ಯನಾರಾಯಣ ನ್ಯಾಯಾಲಯದಲ್ಲಿ ವಾದಿಸಿದ್ದರು.
