ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ KSRTC ಬಸ್ಸು ನಿಲ್ದಾಣದಲ್ಲಿ ದಿನಾಂಕ: 23-01-2026 ರಂದು ಸಂಜೆ ಸಮಯ ಏಳು ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ ಸಮಯ ಯಾರೋ ಕಳ್ಳರು ಚಿನ್ನಾಭರಣಗಳಿರುವ ಬ್ಯಾಗನ್ನು ಕಳವುಗೈದಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ಸಂ: 10/2026 ರಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದರು.
ಪ್ರಕರಣದ ಜಾಡಿನ ಪತ್ತೆಯ ಕುರಿತು ವಿಶೇಷ ತಂಡವನ್ನು ರಚಿಸಿ, ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪ-ವಿಭಾಗ ಇವರ ಮಾರ್ಗದರ್ಶನದಲ್ಲಿ ಪಿಎಸ್ಐ ತೊರಗಲ್ ಮತ್ತು ಸಿಬ್ಬಂದಿಗಳಾದ ಸುಜನ್, ವಾಸುದೇವ, ರವಿ ಲಮಾಣಿ, ಸಿದ್ದು, ಹರೀಶ್, ನಿತಿಶ್, ಗಾಲಿಬ್ ರವರೊಂದಿಗೆ ಕಳವು ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳತನದ ಆರೋಪಿ ಮಹಮ್ಮದ್ ಇಮ್ರಾನ್ ಎನ್.ಎಮ್, ದಾಸವಾಳ ರಸ್ತೆ, ಗಫರ್ ಬಿಲ್ಡಿಂಗ, ತ್ಯಾಗರಾಜ್ ಕಾಲೋನಿ, ಮಡಿಕೇರಿ ಕೊಡಗು ಜಿಲ್ಲೆ* ಎಂಬಾತನನ್ನು ದಿನಾಂಕ: 28-01-2026 ರಂದು ಮಂಗಳೂರು ಸೆಂಟ್ರಲ್ ರೈಲ್ವೇ ಸ್ಟೇಷನ್ ನ ಬಳಿಯಲ್ಲಿ ದಸ್ತಗಿರಿ ಮಾಡಿ ಆರೋಪಿತನಿಂದ ಒಟ್ಟು 6,47,920 ರೂ. ಬೆಲೆಬಾಳುವ 46.28 ಗ್ರಾಂ ತೂಕದ ಚಿನ್ನದ ಒಡವೆ ಹಾಗೂ 5 ಸಾವಿರ ರೂ. ನಗದನ್ನು ಸ್ವಾಧೀನಪಡಿಸಿಕೊಂಡು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಮಹಮ್ಮದ್ ಇಮ್ರಾನ್ ಬಸ್ಸು ನಿಲ್ದಾಣಗಳಲ್ಲಿ ಬೆಲೆಬಾಳುವ ಸೊತ್ತುಗಳಿರುವ ಬ್ಯಾಗ್ ಗಳನ್ನು ಕಳ್ಳತನ ಮಾಡುವ ರೂಢಿಗತ ಆರೋಪಿಯಾಗಿದ್ದು ಹಾಗೂ ಈತನ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಪ್ರಕರಣಗಳು ದಾಖಲಾಗಿರುತ್ತದೆ. ದುದ್ದ ಪೊಲೀಸ್ ಠಾಣೆಯಲ್ಲಿ-1, ಕೊಮನೂರು ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ-1, ಹಾಸನ ನಗರ ಪೊಲೀಸ್ ಠಾಣೆಯಲ್ಲಿ-1, ಚೆನ್ನರಾಯಪಟ್ಟಣ ನಗರ ಠಾಣೆಯಲ್ಲಿ-1, ಮೈಸೂರು ದೇವರಾಜ ನಗರ ಪೊಲೀಸ್ ಠಾಣೆಯಲ್ಲಿ-1 ಬ್ಯಾಗ್ ಕಳ್ಳತನ ಪ್ರಕರಣಗಳು ದಾಖಲಗಿದ್ದು, ಹಾಸನ ಜಿಲ್ಲೆ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ-1, ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ -2, ಹಾಸನ ಜಿಲ್ಲೆ ದುದ್ದ ಪೊಲೀಸ್ ಠಾಣೆಯಲ್ಲಿ-1 ಮನೆ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಮಹಮ್ಮದ್ ಇಮ್ರಾನ್ ಹಾಸನ ಜಿಲ್ಲೆಯ ಮನೆಕಳವು ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಕಾರಣ ಮಾನ್ಯ ನ್ಯಾಯಾಲಯವು ಈತನ ವಿರುದ್ದ ವಾರೆಂಟ್ ಜಾರಿ ಮಾಡಿರುತ್ತದೆ.
