ಅಳದಂಗಡಿ ಪಿಲ್ಯ ಗ್ರಾಮದ ಬರಾಯಕೆರೆ ಅಕ್ರಮ ಗಣಿಗಾರಿಕೆ: ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರಿಗೆ ದೂರು

ಕರಾವಳಿ

ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಜಂಟಿ ಬೇಟಿ; ಸ್ಥಳ ಪರಿಶೀಲನೆ

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಸೋಮವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ತನಿಖೆ, ಪರಿಶೀಲನೆ ನಡೆಸಿದರು.

ಸ್ಥಳೀಯ ಭೂಮಾಲೀಕ, ನ್ಯಾಯವಾದಿಯಾಗಿರುವ ಶ್ರೀಕಾಂತ್ ಭಟ್ ಎಂಬವರು ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ 25 ಕ್ಕೂ ಹೆಚ್ಚು ವರ್ಷಗಳಿಂದ ಸತತವಾಗಿ ಗಣಿಗಾರಿಕೆ ನಡೆಸುತ್ತಿದ್ದು, ಕಾನೂನು ಬಾಹಿರವಾಗಿ ಸ್ಫೋಟಕಗಳನ್ನು ಸ್ಫೋಟಿಸುತ್ತಿದ್ದಾರೆ ಇದರಿಂದಾಗಿ ಶಾಲೆಯ ಮಕ್ಕಳು ಸೇರಿದಂತೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯರ ಮನೆಗಳು ಬಿರುಕು ಬಿಟ್ಟಿದೆ. ಕೃಷಿ ಕೃತಾವಳಿಗಳಿಗೆ ಕಲ್ಲು, ಕಲ್ಲಿನ ಪುಡಿಯಿಂದ ತೊಂದರೆಯಾಗಿದೆ. ಬೃಹತ್ ಗಾತ್ರದ ಲಾರಿಗಳ ಸಂಚಾರದಿಂದ ಗ್ರಾಮ ಪಂಚಾಯತ್ ರಸ್ತೆಗಳು, ಮೋರಿಗಳು ನಾಶಗೊಂಡಿದೆ. ಐತಿಹಾಸಿಕ ಬರಾಯಕೆರೆ ಸಂಪೂರ್ಣ ಕಲುಷಿತಗೊಂಡಿದೆ ಎಂದು ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ರವರಿಗೆ ಬರಾಯಕೆರೆ ಸಂರಕ್ಷಣಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಬಳಿಕ ಸ್ಥಳಕ್ಕೆ ತಾಲೂಕು ತಹಶೀಲ್ದಾರ್ ಹಾಗೂ ಬೆಳ್ತಂಗಡಿ ಡಿವೈಎಸ್ಪಿ ಪ್ರತ್ಯೇಕ ಪ್ರತ್ಯೇಕವಾಗಿ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ಸೋಮವಾರ ಮತ್ತೆ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಾದ ಭೂವಿಜ್ಞಾನಿ ಪವನ್ ವಿ, ಕಿರಿಯ ಅಭಿಯಂತರರಾದ ಯಶವಂತ್ ಎಸ್, ಬೆಳ್ತಂಗಡಿ ತಹಶೀಲ್ದಾರ್ ಎನ್. ಎಸ್ ನರಗುಂದ, ವೇಣೂರು ಕಂದಾಯ ನಿರೀಕ್ಷಕ ಕುಮಾರಸ್ವಾಮಿ, ಪಿಲ್ಯ ಗ್ರಾಮಾಡಳಿತಾಧಿಕಾರಿ ಭಾರತಿ, ಮಹಾತ್ಮ ಗಾಂಧಿ ಅಳದಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಪೂವಪ್ಪ ಮಲೆಕುಡಿಯ ಭೇಟಿ ನೀಡಿ ಗಣಿಗಾರಿಕಾ ಪ್ರದೇಶವನ್ನು ಪರಿಶೀಲನೆ ನಡೆಸಿ, ಗಣಿಗಾರಿಕಾ ಅನುಮತಿಯ ಶರ್ತ ಉಲ್ಲಂಘನೆ, ಅಕ್ರಮ ಸ್ಪೋಟಕ ಬಳಕೆ ಮಾಡುತ್ತಿರುವ ಗಣಿಗಾರಿಕೆಯನ್ನು ರದ್ದು ಪಡಿಸಲು ಸಾರ್ವಜನಿಕ ಮಹಜರು ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಬರಾಯಕೆರೆ ಸಂರಕ್ಷಣಾ ಸಮಿತಿ ಮುಖಂಡರಾದ ಪ್ರಶಾಂತ್ ವೇಗಸ್, ಲಿಯೋ ಪಿರೇರಾ, ಹರೀಶ್ ಪೂಜಾರಿ, ಪ್ರವೀಣ್ ನಿನ್ನಿಕಲ್ಲು, ಜೋನ್ ಡಿಸೋಜ, ಸುಬ್ರಹ್ಮಣ್ಯ ಮಡಿವಾಳ, ವಿಶ್ವನಾಥ ಪಿಲ್ಯ, ಜೋಕಿಂ ಡಿಸೋಜ , ಕೂಸ ಅಳದಂಗಡಿ, ಹರೀಶ್ ಪೂಜಾರಿ, ಗಣೇಶ್ ದೇವಾಡಿಗ, ದಿನೇಶ್ ಪೂಜಾರಿ, ಪ್ರಶಾಂತ್ ಪೂಜಾರಿ, ಉಮೇಶ್ ಪೂಜಾರಿ, ಶರತ್ ಪೂಜಾರಿ, ರಘು ಪೂಜಾರಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.