ಕೆಲಸದ ಆಮಿಷವೊಡ್ಡಿ ವಾಮಂಜೂರಿನ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ: ಓರ್ವ ಆರೋಪಿಗೆ ಜಾಮೀನು

ಕರಾವಳಿ

ಕೆಲಸದ ಆಮಿಷವೊಡ್ಡಿ ಯುವತಿಯನ್ನು ಕರೆಸಿ ಆಕೆಯ ಮೇಲೆ ಅತ್ಯಾಚಾರಗೈದ ಘಟನೆಗೆ ಸಂಬಂಧಿಸಿ ಬಂಧಿತ ಓರ್ವ ಆರೋಪಿಯನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಬನ್ನೂರು ಗ್ರಾಮದ ಬನ್ನೂರು ಬೈಲು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಾರ್ಚ್ 13 ರಂದು ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ವಾಮಂಜೂರು ಮೂಲದ ಯುವತಿಗೆ ಪುತ್ತೂರಿನ ಯುವಕನೊಂದಿಗೆ ಇನ್ ಸ್ಟಾಗ್ರಾಮ್ ಮೂಲಕ ಸಂಪರ್ಕವಿದ್ದು, ಆಕೆಯ ಕೋರಿಕೆಯಂತೆ ಯುವಕ ಪುತ್ತೂರಿನಲ್ಲಿ ಆಕೆಗೆ ಉದ್ಯೋಗಕ್ಕಾಗಿ ತನ್ನ ಸ್ನೇಹಿತರಿಗೆ ತಿಳಿಸಿದ್ದ. ಯುವಕನ ಸ್ನೇಹಿತರಾದ ಕರ್ವೇಲು ಮತ್ತು ಕಡೇಶಿವಾಲಯದ ಇಬ್ಬರು ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ವಾಮಂಜೂರಿನ ಆತನ ಸ್ನೇಹಿತೆಯ ನಂಬರ್ ಪಡೆದು ಆಕೆಗೆ ಉದ್ಯೋಗ ಕೊಡಿಸುವುದಾಗಿ ಪುತ್ತೂರಿಗೆ ಕರೆಸಿದ್ದರು. ಯುವತಿಯು ತನ್ನ ಸ್ನೇಹಿತೆಯ ಜೊತೆಗೆ ಮಾರ್ಚ್ 13 ರಂದು ಪುತ್ತೂರಿಗೆ ಬಂದಾಗ ಕರ್ವೇಲು ಮತ್ತು ಕಡೇಶಿವಾಲಯದ ಆಪಾದಿತ ಯುವಕರಿಬ್ಬರು ಆಕೆಗೆ ಪ್ರೊಫೈಲ್ ಬರೆಯಲೆಂದು ಹೇಳಿ ಆಕೆಯನ್ನು ಬನ್ನೂರು ಗ್ರಾಮದ ಬನ್ನೂರು ಬೈಲು ಬಾಲ ಏಸು ಮಂದಿರ ಬಳಿಯ ನಿರ್ಜನ ಮನೆಯೊಂದಕ್ಕೆ ಕರೆದೊಯ್ದರು. ಅಲ್ಲಿ ಒಬ್ಬಾತ ಯುವತಿಯನ್ನು ಹೊರಗೆ ಕುಳ್ಳಿರಿಸಿ ಇನ್ನೋರ್ವ ಯುವತಿಯನ್ನು ಮನೆಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.

ಘಟನೆ ಬಳಿಕ ಆರೋಪಿ ಯುವಕರಿಬ್ಬರು ಅಲ್ಲಿಂದ ಪರಾರಿಯಾಗಿದ್ದು, ಸಂತ್ರಸ್ತೆ ಯುವತಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ, ಪುತ್ತೂರು ಮಹಿಳಾ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಪೊಲೀಸರು ಆರಂಭದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳಿಗೆ ಬಾಡಿಗೆ ಮನೆ ನೀಡಿ ಆಶ್ರಯ ನೀಡಿದ್ದ ಇಬ್ಬರನ್ನು ಬಳಿಕ ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಪೈಕಿ ಮನು ಯಾನೆ ಮನ್ವಿತ್ ಎಂಬವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ನ್ಯಾಯವಾದಿ ಮಹೇಶ್ ಕಜೆ ರವರು ವಾದಿಸಿದ್ದರು.