ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ಕಡ್ಡಾಯವಾಗಿ ಮಾರ್ಚ್‌ 10 ನೇ ತಾರೀಕಿನೊಳಗೆ ಗ್ರಾಮ ಪಂಚಾಯತ್ ಸಭೆಯಲ್ಲಿ ಬಜೆಟ್ ಮಂಡಿಸಬೇಕು: ಖರ್ಗೆ

ರಾಜ್ಯ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳೂ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ರೀತಿಯಲ್ಲಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಗ್ರಾಮ ಪಂಚಾಯತಿ ಆಯವ್ಯಯ (ಪಂಚಾಯತ್‌ ಬಜೆಟ್) ಕಡ್ಡಾಯವಾಗಿ ತಯಾರಿಸಿ ಮಾರ್ಚ್‌ 10 ನೇ ತಾರೀಕಿನೊಳಗೆ ಗ್ರಾಮ ಪಂಚಾಯತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಗ್ರಾಮ ಪಂಚಾಯತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿಯಲ್ಲಿ ದೊರೆಯುವ ಅನುದಾನದ ಜೊತೆಗೆ ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಈ ಎಲ್ಲಾ ಮೂಲಗಳನ್ನು ಕ್ರೋಢೀಕರಿಸಿ ಗ್ರಾಮ ಪಂಚಾಯತಿಗಳು ಆಯವ್ಯಯವನ್ನು ಸಿದ್ಧಪಡಿಸಿ ಅನುಮೋದನೆ ಪಡೆದುಕೊಳ್ಳಲು ಸಚಿವರು ಎಲ್ಲಾ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಪತ್ರದಲ್ಲಿ ವೈಯಕ್ತಿಕವಾಗಿ ಕೋರಿದ್ದಾರೆ.

ಗ್ರಾಮ ಪಂಚಾಯತಿ ಸಭೆಯಲ್ಲಿ ಅನುಮೋದನೆಯಾದ ಆಯವ್ಯಯವನ್ನು ತಾಲ್ಲೂಕು ಪಂಚಾಯಿತಿಗೆ ಕಳುಹಿಸಿಕೊಡಬೇಕು ಎಂದು ಹೇಳಿರುವ ಸಚಿವರು ಗ್ರಾಮ ಪಂಚಾಯತಿ ಆಯವ್ಯಯವು (ಪಂಚಾಯತ್‌ ಬಜೆಟ್) ಲಭ್ಯ ಅನುದಾನ, ಅದು ಕೈಗೊಳ್ಳುವ ಜನಪರ ಯೋಜನೆಗಳು ಹಾಗೂ ತನ್ನ ಅಭಿವೃದ್ಧಿ ಪರ ಆಶಯಗಳನ್ನು ಪ್ರತಿಬಿಂಬಿಸುವಂತಿರಬೇಕಾಗುತ್ತದೆಂದು ತಿಳಿಸಿದ್ದಾರೆ. ರಾಜ್ಯದ ಬಹಳಷ್ಟು ಗ್ರಾಮ ಪಂಚಾಯತಿಗಳು ಸಕಾಲದಲ್ಲಿ ಆಯವ್ಯಯ ತಯಾರಿಸಿ ಅನುಮೋದನೆ ಪಡೆಯದೇ ವೆಚ್ಚ ಭರಿಸುತ್ತಿರುವುದು ಲೆಕ್ಕಪರಿಶೋಧನಾ ವರದಿಗಳಿಂದ ತಿಳಿದು ಬಂದಿದ್ದು, ಗ್ರಾಮ ವಿಕೇಂದ್ರಿಕರಣದ ಆಶಯಗಳಂತೆ ಪಂಚಾಯತಿಗಳು ಬಜೆಟ್‌ ಮಂಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.